Thursday, 24 October 2019

ಆತ ಬರೆದ ಕಾರ್ಡನ್ನು ಪೋಸ್ಟ ಮಾಡಲು ನನಗೇ ಹೇಳಬೇಕು! ಮತ್ಯಾರಿದ್ದಾರೆ ಅಲ್ಲಿ?


           
       ಹಾಗೆ ನೋಡಿದರೆ ಅಣ್ಣನದು ತೀರಿಕೊಳ್ಳುವ ವಯಸ್ಸೇನೂ ಆಗಿರಲಿಲ್ಲ. ಆಗ ಆತನಿಗೆ ಕೇವಲ ೭೨ ವರ್ಷ. ಆತನಿಗೆ ಶುಗರ್ ಇರಲಿಲ್ಲ. ಬಿ.ಪಿ. ಇರಲಿಲ್ಲ. ಕಿಟಿಕಿಟಿ ದೇಹ. ದಿನನಿತ್ಯ - ಮೈಲಿ ವಾಕಿಂಗ್ ಮಾಡುತ್ತಿದ್ದ. ಆತನ ಬಟ್ಟೆ ಆತನೇ ತೊಳೆದುಕೊಳ್ಳುತ್ತಿದ್ದ. ತೆಂಗಿನ ಮರಕ್ಕೆ ನೀರು ಬಿಡುತ್ತಿದ್ದ.  ಸದಾ ಓಡಾಟ ಮಾಡುತ್ತಿದ್ದ. ರಾತ್ರಿ ೧೨ ಗಂಟೆಯವರೆಗೆ ಕೂತು ಓದಿ ಬರೆಯುವುದು ಮಾಡುತ್ತಿದ್ದ. ಬೆಳಿಗ್ಗೆ .೩೦ ಕ್ಕೆ ಎದ್ದು ರೇಡಿಯೋ ಹಾಕಿದರೆ ವಾರ್ತೆ ಮುಗಿಯುವವರೆಗೆ ಅದು ಮಾತಾಡುತ್ತಿರುತ್ತಿತ್ತು. ಊಟವೂ ದೊಡ್ಡದಲ್ಲ. ಬೆಳಿಗ್ಗೆ ತಿಂಡಿ ತಿಂದರೆ ಮಧ್ಯಾಹ್ನ ಊಟ, ಸಂಜೆ ಚಹಾ, ಮತ್ತೆ ರಾತ್ರಿ ಊಟ ಅಷ್ಟೇ. ಕರಿದ ಪದಾರ್ಥ, ಸಿಹಿ ಇತ್ಯಾದಿ ಅತಿಯಾಗಿ ಏನೂ ತಿನ್ನುತ್ತಿರಲಿಲ್ಲ..... ಆದರೂ ಆತನಿಗೆ ಬಂದ ನ್ಯುಮೋನಿಯಾ, ಉಸಿರಾಟದ ತೊಂದರೆ, ಒಂದೆರಡು ಸಲ ಆದ ಸರ್ಪಸುತ್ತು, ಕುರು(ಕೀವು ತುಂಬಿದ ಒಂದು ಬಗೆಯ ಸಣ್ಣ ಗಡ್ಡೆ) ಸದಾ ಇರುವ ನೆಗಡಿ..... ಅವನ ಕೊನೆಯ ದಿನಗಳನ್ನು ಕಷ್ಟವಾಗಿಸಿತು. ಆತನಿಗೆ ಆದ ಸರ್ಪಸುತ್ತಿನ ಮೇಲಿನ ಗಾಯ ಆರಿದರೂ ಒಳಗಾಯ ಹಾಗೇ ಉಳಿಯಿತು. ಅಂಗಿ ಬನಿಯನ್ ಹಾಕಿದರೆ ಹಸಿಗಾಯದ ಮೇಲೆ ಬಟ್ಟೆ ಹಾಕಿದಂತಾಗುತ್ತದೆಂದು ಹೇಳುತ್ತಿದ್ದ. ಬಸ್ಅಲ್ಲಿ, ಕಾರ್ಯಕ್ರಮದಲ್ಲಿ ಹಾಕಿಕೊಂಡ ಜುಬ್ಬಾವನ್ನು ಹಲವು ಬಾರಿ ಕೈಯಲ್ಲಿ ಎತ್ತಿ ಹಿಡಿದುಕೊಂಡಿರುತ್ತಿದ್ದ. ಅಷ್ಟು ಅವನನ್ನು ಅದು ಕಾಡಿತ್ತು. ಮತ್ತು ಆಗಾಗ ಅವನಿಗೆ ಏಳುವ ಕುರು ದೊಡ್ಡ ಹಿಂಸೆ ಕೊಡುತ್ತಿತ್ತು. ಆದರೆ ಅದೆಲ್ಲಾ ಸಹಿಸಿಕೊಂಡೇ ಅವನು ಓದು, ಬರೆಹದಲ್ಲಿ ತಲ್ಲೀನನಾಗಿರುತ್ತಿದ್ದ.
     ಒಮ್ಮೆ ವಾಕಿಂಗ್ ಮುಗಿಸಿ ಬರುವಾಗ ಯಾರೋ ಒಬ್ಬ ಎಲೆಚೂಳಿ ಹಾಕಿಕೊಂಡು ಹೋಗುವ ಬೈಕ್ ಈತನಿಗೆ ಹೊಡೆದು ಗಟಾರಕ್ಕೆ ಕೆಡವಿ ಹೋಗಿತ್ತು. ಅಲ್ಲಿಂದ ಪ್ರಾರಂಭವಾದ ಆತನ ಆಸ್ಪತ್ರೆ ಪಯಣ ಅವನ ಜೀವನದ ಕೊನೆಯವರೆಗೂ ಮುಂದುವರಿಯಿತು.
      ಮೊದಮೊದಲು ವರ್ಷಕ್ಕೆ - ಬಾರಿ ಆಸ್ಪತ್ರೆಗೆ ಹೋಗುವುದಿತ್ತು. ನಂತರ ತಿಂಗಳಿಗೆ ಬಾರಿ ಬಾರಿ ಹೋಗಬೇಕಾಯಿತು. ಆಗಾಗ ಕಾಡುವ ಯೂರಿನ್ ಇನ್ಫೆಕ್ಷನ್ಗೆ ಸಾವಿರಾರು ರೂ.ಗಳನ್ನು ದೊಡ್ಡಾಸ್ಪತ್ರೆಯಲ್ಲಿ ಖರ್ಚು ಮಾಡಿದರು. ಆದರೆ ಒಮ್ಮೆ ಶಿರಸಿಯಲ್ಲಿ ಡಾ|| ಪಟವರ್ಧನ ಅವರು ನೋಡಿ ೨೫೦ ರೂ. ಔಷಧ ಕೊಟ್ಟು ಅದನ್ನು ಪೂರ್ತಿಯಾಗಿ ವಾಸಿ ಮಾಡಿಕೊಟ್ಟರು. ಅಲ್ಲಿಂದ ಆತ ಅದೊಂದು ಖಾಯಿಲೆಯಿಂದ ಬಚಾವಾದ. ಸಾವಕಾಶ ಡಿಮೆನ್ಶಿಯಾ ಕಾಡಲು ಪ್ರಾರಂಭಿಸಿತು. ಆಗಲೇ ಆತನನ್ನು ನಾನು ಕೆರೆಕೋಣಿನಿಂದ ಸಿದ್ದಾಪುರಕ್ಕೆ ಕರೆದುಕೊಂಡು ಹೋದೆ. ಸುಮಾರು ಒಂದು ಒಂದುವರೆ ವರ್ಷ ಇನ್ನಕ್ಕ, ಯಮುನಾ, ಮಾಧವಿಯರ ಆರೈಕೆಯಲ್ಲಿ ಉಳಿದ. ಅವನ ಅನಾರೋಗ್ಯದಲ್ಲಿಯೇ ಸಿದ್ದಾಪುರದ ಸಾಹಿತ್ಯಾಸಕ್ತರು -ಜಿ.ಜಿ. ಹೆಗಡೆ, ಸಿ.ಎಸ್. ಗೌಡರ್, ಹೊನ್ನೆಗುಂಡಿ- ಮುಂತಾದವರು ಮನೆಗೆ ಬಂದು ಸನ್ಮಾನಿಸಿ ಹೋದರು. ನನಗ್ಯಾಕೆ ಸನ್ಮಾನ? ಅನಾರೋಗ್ಯದಲ್ಲಿದ್ದಾನೆ ಎಂದೆ? ಎಂದು ಸಣ್ಣಗೆ ತಮಾಷೆ ಮಾಡಿದ್ದ.
          ಅಣ್ಣನ ಅನಾರೋಗ್ಯ ಇನ್ನಷ್ಟು ಉಲ್ಬಣವಾಗುತ್ತಿರುವಾಗ ಒಂದಿಷ್ಟು ದಿನ ಮಾಧವಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಳು. ಅಲ್ಲಿಯೇ ಅಣ್ಣನಮೀನ್ಪಳ್ದಿ ಕಥಾಸಂಕಲನ ಬಿಡುಗಡೆಯಾಗಿದ್ದು. ಅಣ್ಣನ ಸ್ನೇಹಿತರೆಲ್ಲಾ ಚಿಂತನದ ಆಹ್ವಾನದ ಮೇರೆಗೆ ಮಾಧವಿ ಮನೆಗೆ ಬಂದು ಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಂಡಿದ್ದರು. ಡಾ. ಎಂ.ಜಿ. ಹೆಗಡೆಯವರು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ನೆನಪು.
         ಕೊನೆಯ ದಿನಗಳು ಹೆಚ್ಚು ಕಡಿಮೆ ಮಣಿಪಾಲ ಆಸ್ಪತ್ರೆಯಲ್ಲಿಯೇ ಕಳೆದ. ಆಸ್ಪತ್ರೆಯಲ್ಲಿ ಇರುವಾಗಲೂ ಆತನ ತಲೆಯ ಹತ್ತಿರ ಒಂದು ಪುಸ್ತಕ, ಒಂದು ಡೈರಿ, ಇನ್ನೊಂದು ಪೆನ್ನು ಇರಲೇಬೇಕು. ಆತ ನಮ್ಮನ್ನಗಲಿದ್ದು ೨೦೦೮ ಅಕ್ಟೊಬರ್ನಲ್ಲಿ. ಆತ ನವೆಂಬರ್ ಡಿಸೆಂಬರ್ ೨೦೦೭ ವರೆಗೂ ಕವಿತೆ, ಕತೆ ಬರೆಯುತ್ತಿದ್ದ. ಅದರೆ ಅದು ಒಮ್ಮೊಮ್ಮೆ ಏನು ಎಂದು ಗೊತ್ತಾಗುತ್ತಿರಲಿಲ್ಲ. ಕಾಟು ಹಾಕುತ್ತಿದ್ದ. ಕೆಲವನ್ನು ಬರೆದು ಯಮುನಾಳ ಹತ್ತಿರ copy ಮಾಡಲು ನೀಡುತ್ತಿದ್ದ. ಸಾಮಾನ್ಯವಾಗಿ ಕೊನೆಯ ದಿನಗಳಲ್ಲಿ ಅಣ್ಣನ ಜೊತೆ ಹೆಚ್ಚು ಕಳೆದದ್ದು ಇನ್ನಕ್ಕ, ಯಮುನಾ ಮತ್ತು ಗಣಪತಿ. ಹಾಗೆಯೆ ಅತ್ತಿಗೆ(ಗಣಪತಿಯ ತಾಯಿ)-ಅಂತ್ಯಂತ ಕಾಳಜಿ ಮತ್ತು ಪ್ರೀತಿಯಿಂದ ಅಣ್ಣನ ಊಟ ಸಿದ್ಧತೆ ಮಾಡಿಕೊಡುತ್ತಿದ್ದಳು. ರೋಹಿದಾಸ ಭಾವನ ಸೇವೆ ಮಾಡುವ ಪುಣ್ಯದ ಕೆಲಸವೆಂದು ಹೇಳುತ್ತಿದ್ದಳು. ಅಷ್ಟೊಂದು ಪ್ರೀತಿ ಮತ್ತು ಭಕ್ತಿ ಅವಳಿಗೆ. ಅಕ್ಕ ಎಂದರೂ ಅವಳಿಗೆ ಇಷ್ಟವೆ. ಅಣ್ಣನಿಗೂ ಹಾಗೆ. ಸಾವಿತ್ರೀ ಅಂತ ಬಾಯಿ ತುಂಬಾ ಕರೆಯುತ್ತಿದ್ದ. ಅತ್ತಿಗೆ ತುಂಬಾ ಚೆಂದ ಹಾಡುತ್ತಿದ್ದಳು. ಎಂತಾ ಕಿತ್ತು ತಿನ್ನುವ ಬಡತನದಲ್ಲೂ ಎದೆಗುಂದದೆ ದೊಡ್ಡ ಸಂಸಾರ ನಡೆಸಿದ ಅವಳೆಂದರೆ ಅಷ್ಟೊಂದು ಪ್ರೀತಿ ಅವನಿಗೂ- ಸುನಿತಕ್ಕ.  ನಾನು ಮತ್ತು ಮಾಧವಿ ಇಬ್ಬರೂ ಕಾಲೇಜಿನ ಕೆಲಸಕ್ಕೆ ಹೋಗುತ್ತಿರುವುದರಿಂದ ರಜೆ ಇದ್ದಾಗ ಹೆಚ್ಚು ಭೇಟಿ ಕೊಡುತ್ತಿದ್ದೆವು. ಯಮುನಾ ಇದ್ದಷ್ಟು ಹೊತ್ತು ಅವನಿಗೆ ಏನಾದರೂ ಬರೆಯಲು ಹೇಳುತ್ತಿದ್ದಳು.ಅಲ್ಲಿಯ ನರ್ಸರನ್ನು ಪಾರಿವಾಳಗಳಿಗೆ ಹೋಲಿಸಿ ಪದ್ಯ ಬರೆದಿದ್ದ. ಅದನ್ನ ನೋಡಿ ಅವರು ತುಂಬಾ ಖಿಷಿಗೊಂಡಿದ್ದರು.
ಆತ ಕೊನೆಯಲ್ಲಿ ಬರೆದ ಕವಿತೆಯ ತುಣುಕುಗಳಿವು:
ಕಟ್ಕಟ್ ಎಂಬ ಶಬ್ದ ಕೇಳುತ್ತಲೇ ಇದೆ
ಹಗಲು ರಾತ್ರಿ ಎಂಬ ಭೇದವೇ ಇಲ್ಲ.
ಒಂದೊಂದು ಹೊಡೆತಕ್ಕ ಬಂಡೆ ಬದಲುಗೊಳ್ಳುತ್ತದೆ.
ಇದೇ ಸರಿಯಾದುದು ಇದರ ಹೊರತು
ಯಂತ್ರಗಾರಿಕೆ ಬೆಳೆಯಲಾರದು
ದೇಶದ ಉನ್ನತಿ ಆಗಲಾರದು೧೫-೦೮-೨೦೦೭
ಎಂದು ಬರೆಯಲು ಹೋದ ಸಾಲುಗಳು ಅಲ್ಲಲ್ಲೆ ನಿಂತು ಬಿಡುತ್ತಿದ್ದವು. ಇಡೀ ದಿನ ಮಕ್ಕಳದೇ ನೆನಪು ಮಾಡುವುದು. ಮಾಧವಿಯ ಹತ್ತಿರ ಆಸ್ಪತ್ರೆ ಮಂಚದ ಮೇಲೆ ಕುಳಿತು ಅಲ್ಲಿ ಮಕ್ಕಳು ಓಡಾಡುತ್ತಾರೆ, ಅವರನ್ನು ಒಳಗೆ ಕರೆ, ಅವರಿಗೆ ತಿಂಡಿ ಕೊಡು, ಅವರನ್ನು ಮಾತನಾಡಿಸು...... ಹೀಗೆ ಮಕ್ಕಳ ಕುರಿತೇ ಮಾತನಾಡುತ್ತಿದ್ದ.
ಬನ್ನಿ ಮಕ್ಕಳೆ ಇದು ನಿಮ್ಮದೇ ಉದ್ಯಾನ
ನೂರಾರು ಬಣ್ಣ ಹೂವುಗಳ ಪಕಳೆ
ಹೇಗೆ ತೂಗುತ್ತವೆ ನೋಡಿ
..........”
ಹೀಗೆ ಮಕ್ಕಳ ಕುರಿತೇ ಒಂದು ಪದ್ಯ ಬರೆದು ದಿನಾಂಕ & ಮಣಿಪಾಲ ಆಸ್ಪತ್ರೆಯಿಂದ ಎಂದು ಬರೆಯುತ್ತಿದ್ದ.
ತುಳಿಯದಿರಿ, ಮಕ್ಕಳೇ ಚಿನ್ನ, ಜಡ, ಮೋಡ, ಮುಂತಾದ ಕವಿತೆಗಳನ್ನು ಆತ ಬರೆದಿಟ್ಟಿದ್ದ. ಕೊನೆಯ ದಿನಗಳಲ್ಲಿ ಆತ ಬರೆದ ಕವಿತೆ
ನಾನು ಸಣ್ಣವನಿದ್ದಾಗ
ಕಣ್ ಕಂಗಲ ಹಿಡಿದು
ಸೂರ್ಯನ ನೋಡುತ್ತಿದ್ದೆ
ಆಡುತ್ತಿದ್ದೆ
ಈಗ
ನಾನು ಸೂರ್ಯನಿಲ್ಲದ ಲೋಕಕ್ಕೆ
ಹೊರಟಿದ್ದೆÃನೆ.”
 ಓದಿ ಯಾರ ಕಣ್ಣನ್ನೂ ಆರ್ದ್ರಗೊಳಿಸುವಂತಿತ್ತು. ಕೊನೆಯ ದಿನಗಳಲ್ಲಿ ಬರೆದ ಕವಿತೆಗಳು ಅಸ್ಪಷ್ಟವಾಗಿದ್ದವು. ಅಕ್ಷರಗಳು ಅಸ್ತವ್ಯಸ್ತ ಇರುತ್ತಿತ್ತು. ಕೆಲವು ಸಾಲುಗಳು ಸಂಬಂಧ ಕಳೆದುಕೊಂಡಿದ್ದವು. ಆದರೂ ಆತ ಬರೆಯುವುದನ್ನು ಮಾತ್ರ ಬಿಡಲಿಲ್ಲ. ಕೊನೆಕೊನೆಗೆ ಕೈ ಎತ್ತಲು ಆಗದಿದ್ದರೂ ತಲೆಯ ಪಕ್ಕದಲ್ಲಿ ಪಟ್ಟಿ, ಪೆನ್ನು ಇದೆಯಾ ಎಂದು ನೋಡಿಕೊಳ್ಳುತ್ತಿದ್ದ.
                ಅಣ್ಣ ಕೊನೆಯ ಒಂದು ವಾರ ಕೃತಕ ಉಸಿರಾಟದಲ್ಲಿಯೇ ಇದ್ದದ್ದು. ಐಸಿಯು ದಲ್ಲಿ ಮಲಗಿದ್ದ. ಮೂಗು, ಬಾಯಿ, ಎದೆ, ಕೈಬೆರಳು, ಕಾಲು ಬೆರಳು ಇವಕ್ಕೆಲ್ಲ ಏನೇನೋ ಯಂತ್ರವನ್ನು ಅಳವಡಿಸಿದ್ದರು. ಆತನನ್ನು ಉಳಿಸಿಕೊಳ್ಳಲು ಮಾಡಿದ ಎಲ್ಲಾ ಪ್ರಯತ್ನವೂ ವಿಫಲವಾಗುತ್ತಿತ್ತು. ಬೆಳಿಗ್ಗೆ ಅರ್ಧ ಗಂಟೆ ಮತ್ತು ಸಂಜೆ ಅರ್ಧ ಗಂಟೆ ಅಣ್ಣನನ್ನು ನೋಡಲು ಐಸಿಯು ಒಳಗೆ ಬಿಡುತ್ತಿದ್ದರು. ಬೆಳಿಗ್ಗೆ ರಿಂದ ಸಂಜೆ ಗಂಟೆ ಆಗುವ ತನಕ ಹೊರಗೆ ಕಾದು ಕುಳಿತಿರುತ್ತಿದ್ದೆವು. ಗಡಿಯಾರವು ತೀರಾ ಸಾವಕಾಶ ಓಡಿದಂತೆ ಅನಿಸುತ್ತಿತ್ತು. ಒಳಗೆ ಹೋದಾಗ ಮಾತ್ರ ೩೦ ನಿಮಿಷಗಳ ಕಾಲ ಗಡಿಯಾರ ವೇಗವಾಗಿ ಓಡುವ ನೋವು. ಅಣ್ಣನ ನೋಡುವ ತವಕ. ಆತ ಒಮ್ಮೆ ಕಣ್ಣು ಬಿಟ್ಟು ನೋಡಿದರೆ ಅಂದೇ ನಮಗೆ ಹಬ್ಬ. ನಾನು ಇನ್ನಕ್ಕ, ಮಾಧವಿ ಯಮುನಾ ಎಲ್ಲರೂ ಅಣ್ಣ ನನ್ನನ್ನು ನೋಡಿದ ನನ್ನನ್ನು ನೋಡಿದ ಎಂದು ಸಂಭ್ರಮ ಪಡುತ್ತಿದ್ದೆವು. ಅವನು ಅಸಹಾಯಕತೆಯಿಂದ ಕೈಕಾಲು ಸ್ವಲ್ಪ ಎತ್ತುವುದಕ್ಕೆ, ತುಟಿಯನ್ನು ಅಗಲಿಸುವುದಕ್ಕೆ, ಕಣ್ಣನ್ನು ತೆರೆಯುವುದಕ್ಕೆ ನಾವು ನಮ್ಮದೇ ಆದ ವಿಶೇಷ ಅರ್ಥ ಕಲ್ಪಿಸಿಕೊಂಡು ಮತ್ತೆ ಸಂಜೆ ವರೆಗೆ ಚರ್ಚಿಸುತ್ತಾ ಕೂತಿರುತ್ತಿದ್ದೆವು. ಮೊದಲು ಅಣ್ಣನನ್ನು ನೋಡುವವರು ಯಾರು ಎಂದು ನಮ್ಮ ನಮ್ಮಲ್ಲೇ ಒಂದು ಸ್ಪರ್ಧೆ ಇರುತ್ತಿತ್ತು. ನಮ್ಮಂತೆ ಐಸಿಯುದ ಬಾಗಿಲಲ್ಲಿ ಇಂಥ ಹತ್ತಾರು ಕುಟುಂಬಗಳು ಕಾದು ಕುಳಿತಿರುತ್ತಿದ್ದವು. ಏನಾದರೂ ಸುಳ್ಳು ಹೇಳಿ ಒಳಗೆ ಹೋಗು ಪ್ರಯತ್ನ ನಡೆದೇ ಇರುತ್ತಿತ್ತು.
                ಕೊನೆಗೂ ವೈದ್ಯರು ಮತ್ತು ನಮ್ಮ ನಡುವಿನ ಸಂಘರ್ಷದ ದಿನ ಹತ್ತಿರ ಬಂತು. ಅಣ್ಣನ ಕೈಕಾಲುಗಳು ಬಾತುಕೊಳ್ಳಲು (ಸ್ವೆಲ್ಲಿಂಗ್) ಪ್ರಾರಂಭಿಸಿತು. ಕೃತಕ ಉಸಿರಾಟಕ್ಕೂ ದೇಹ ಒಗ್ಗಿಕೊಳ್ಳಲು ನಿರಾಕರಿಸುತ್ತಿತ್ತು. ಕೃತಕ ಉಸಿರಾಟ ತಪ್ಪಿಸಿದರೆ ಅಣ್ಣ ನಮ್ಮನ್ನಗಲುತ್ತಾನೆ. ತಪ್ಪಿಸದಿದ್ದರೆ ದೇಹ ಮತ್ತಿಷ್ಟು ಹದಗೆಡುತ್ತಾ ಹೋಗುತ್ತದೆ. ಹಾಗಾಗಿ ವೈದ್ಯರು ನನ್ನನ್ನು ಕರೆದು ನಿಮ್ಮ ಆಯ್ಕೆ ಯಾವುದೆಂದು ಕೇಳುತ್ತಿದ್ದರು. “ಅವನನ್ನು ನೋಡಿಕೊಳ್ಳುತ್ತಿರುವ ವೈದ್ಯರು ನೀವು, ತೀರ್ಮಾನ ನೀವೇ ತೆಗೆದುಕೊಳ್ಳಬೇಕು ಎನ್ನುತ್ತಿದ್ದೆ. ಇದು ಒಂದರ್ಥದಲ್ಲಿ ಅಣ್ಣನ ಸಾವಿನ ದಿನವನ್ನು ನಿರ್ಧರಿಸುವವರು ಯಾರು ಎಂಬ ನಮ್ಮಿಬ್ಬರ ನಡುವಿನ ಒಂದು ಸಂಕಷ್ಟದ ವಾದ ವಿವಾದ. ನಾನು ದಿನವನ್ನು ಮುಂದೂಡತ್ತಲೇ ಇದ್ದೆ. ಆದರೆ ವೈದ್ಯರೇ ಸಲಹೆ ನೀಡುವ ದಿನ ಹತ್ತಿರ ಬಂತು. ೨೫ ನೇ ತಾರೀಖು ಅಣ್ಣನ ದೇಹ ಎಲ್ಲಾ ರೀತಿಯ ಚಿಕಿತ್ಸೆಗೂ ಕಿಂಚಿತ್ತೂ ಸ್ಪಂದಿಸದ ದಿನ ಅದು. ಬಹುಶಃ ಮಧ್ಯಾಹ್ನ ಗಂಟೆ ಹೊತ್ತಿಗೆ ಆಸ್ಪತ್ರೆಯನ್ನು ಬಿಟ್ಟು ಮನೆಯ ಕಡೆಗೆ ಹೊರಟೆವು.
ಯಾವ ದೀಪಾವಳಿ ಅವನಿಗೆ ತೀರಾ ಇಷ್ಟದ ಬೆಳಕಿನ ದಿನವಾಗಿತ್ತೋ  ದೀಪಾವಳಿಯ ಮುನ್ನಾದಿನವೇ ಆತನ ಜೀವದೀಪ ಆರಿಹೋಯಿತು. ಯಾವಾಗಲೂ ಅಣ್ಣ ಪ್ರೀತಿಯಿಂದ ದೀಪ ಹಚ್ಚುತ್ತಿದ್ದ. ಬಡತನದಲ್ಲಿ ಮೇಣದ ಬತ್ತಿ ತರಲಾಗದಿದ್ದರೂ ಸಂಬಂಧಿಕರ ಮನೆಯಿಂದಾದರೂ ತಂದು ಹಚ್ಚಿದ ಮೇಣದ ಬತ್ತಿ ಇಂದು ನಂದಿ ಹೋಯಿತು. ಸದಾ ಬೆಳಕಿನ ಬಗ್ಗೆ ಮಾತನಾಡುವ ಮನೆಯಲ್ಲಿ ಬೆಳಕು ಆರಿ ಕತ್ತಲಾವರಿಸಿತು. ಇಂದು ಇಂಥ ಸಾವಿರಾರು ಮೇಣದ ಬತ್ತಿಯನ್ನು ತಂದು ಹಚ್ಚುವ ಸ್ಥಿತಿ ಇದೆ. ಆದರೆ ಅಣ್ಣ ಇಲ್ಲ. ಅಣ್ಣನ ನೆನಪು ಮಾತ್ರ ಸಹಯಾನದ ರೂಪ ಪಡೆದಿದೆ.
       ಕೆರೆಕೋಣದ ಮನೆಯಲ್ಲಿ ರಾತ್ರಿಯಿಡೀ ದೊಡ್ಡ ಮಂಜುಗಡ್ಡೆಯ ಮೇಲೆ ಮಲಗಿದ್ದು ನೋಡಿದರೆ ಹೊಟ್ಟೆಯಲ್ಲಿ ಚುರ್ ಅನ್ನಿಸುತ್ತಿತ್ತು. ರಾತ್ರಿಯಿಡಿ ಮಂಜುಗಡ್ಡೆಯ ಮೇಲೆ ಮಲಗಿದರೆ ಚಳಿಯಾಗದೆ? ಆತ ಯಾವಾಗಲೂ ಇಷ್ಟಪಡುವ ಕರಿಕಂಬಳಿಯನ್ನು (ಕಂಬಳಿಯನ್ನು ಆತ ಸಿದ್ದಾಪುರದಿಂದ ಭಾವನಿಗೆ ಹೇಳಿ ತರಿಸಿಕೊಳ್ಳುತ್ತಿದ್ದ.) ಹೊದೆಸಿ ಬಿಡೋಣವೇ ಅನ್ನಿಸುತ್ತಿತ್ತು.
          ಅಂತ್ಯಕ್ರಿಯೆಯಲ್ಲಿ ಯಾವ ಧಾರ್ಮಿಕ ವಿಧಿ ವಿಧಾನವೂ ಇರಲಿಲ್ಲ. ಏಕೆಂದರೆ, ಅದು ಅವನ ಆಸೆಗೆ ವಿರುದ್ಧವಾದದ್ದು. ನಾನೂ ಹೆಗಲು ಕೊಟ್ಟೆ. ನಾನು, ಇನ್ನಕ್ಕ, ಮಾಧವಿ, ಯಮುನಾ ನಾಲ್ವರು ಸೇರಿ ಅಗ್ನಿ ಸ್ಪರ್ಷ ಮಾಡಿದೆವು.
       ಅಕ್ಕ ನಮ್ಮನ್ನಗಲಿದಾಗ ಕೂಡ ಅದೇ ಸ್ಥಳದಲ್ಲಿಯೇ ಅಂತ್ಯಕ್ರಿಯೆ ಮಾಡಿದ್ದು. ಹಿಂದೆ ಆಯಿಯನ್ನೂ(ಅಣ್ಣನ ತಾಯಿ) ಅದೇ ಜಾಗದಲ್ಲಿಯೇ ಅಂತ್ಯಕ್ರಿಯೆ ಮಾಡಿದ್ದು. ಮೂವರೂ ಒಟ್ಟಿಗೆ ಇದ್ದಾರೆ. ಅಡಿಗೆ ಮಾಡಿಕೊಡಲು, ಖರ್ಚು-ವೆಚ್ಚ ತೂಗಿಸಲು ಅಕ್ಕ, ಕವಳ ಜಪ್ಪಿ ಹದ ಮಾಡಿಕೊಡಲು ಆಯಿ ಅಲ್ಲೇ ಇದ್ದಾರೆ. ಆದರೆ ಅಣ್ಣನ ಬಗಲ ಚೀಲದಲ್ಲಿರುವ ಕವಿತೆ ಕೇಳುವವರು ಯಾರು? ಬಹುಶಃ ಆಯಿ ಹುಡ್ಗ ಸುಮ್ಮನೆ ಮಲಿಕಾ ನೋಡ್ವಾ ಎಂದು ಹುಸಿಕೋಪ ತೋರುತ್ತಿರಬಹುದೆ? ಅಥವಾ ಅಕ್ಕ, ಆಯಿ ಇಬ್ಬರಿಗೂ ಅಣ್ಣ ಕವಿತೆ ಕೇಳುವ ರೂಢಿಯನ್ನು ಮಾಡಿಸಿರಬಹುದೆ? ಆತ ಬರೆದ ಕಾರ್ಡನ್ನು ಪೋಸ್ಟ ಮಾಡಲು ಅಲ್ಲಿ ನಾನಿಲ್ಲ. ಮತ್ಯಾರಿದ್ದಾರೆ?

      ಅನಿವಾರ್ಯವಾಗಿ ಅತ ನನ್ನಲ್ಲಿಯೇ ಬರಬೇಕು. ‘ಮರಿ ಇದನ್ನು ಸರಿಯಾಗಿ ತೂಕ ಮಾಡಿ ಸ್ಟಾಂಪ್ ಅಂಟಿಸಿ ಹಾಕು. ಇಲ್ಲದಿದ್ದರೆ ಡ್ಯೂ ಆಗುತ್ತದೆ. ಪಾಪ, ಅವರಿಗೆ ಅನವಶ್ಯಕ ಖರ್ಚು ಎಂದು ನನ್ನಲ್ಲಿ ಹೇಳದೆ ಆತ ಮತ್ಯಾರಲ್ಲಿ ಹೇಳುತ್ತಾನೆ?
                                                                                                                                ವಿಠ್ಠಲ ಭಂಡಾರಿ

Wednesday, 25 September 2019

ಮುಂದಿನ ಜನ್ಮದಲ್ಲಿ ಲೇಖಕನಾಗಿ ಹುಟ್ಟಬೇಕೆಂಬುದು ನನ್ನ ಆಸೆ’ ಫಿಡೆಲ್


Image result for fidel castro
ಮೊನ್ನೆ ಫಿಡೆಲ್ ಕ್ಯಾಸ್ಟ್ರೊನ ಚಿತಾಭಸ್ಮವನ್ನು ಅವನ ನೆಚ್ಚಿನ ಕ್ರಾಂತಿಕಾರಿ ಚಿಂತಕ ಜೋಸ್ ಮಾರ್ತಿಯ ಸಮಾಧಿಯ ಪಕ್ಕದಲ್ಲಿಟ್ಟ ದಿನ, ಹಿಂದೊಮ್ಮೆ ಮಾರ್ಕ್ವೆಜ್ ಜೊತೆ ಮಾತಾಡುತ್ತಾ, ‘ಮುಂದಿನ ಜನ್ಮದಲ್ಲಿ ಲೇಖಕನಾಗಿ ಹುಟ್ಟಬೇಕೆಂಬುದು ನನ್ನ ಆಸೆ’ ಎಂದು ಫಿಡೆಲ್ ಹೇಳಿದ್ದು ನೆನಪಾಯಿತು. 

ಜಗತ್ತಿನ ಶ್ರೇಷ್ಠ ಲೇಖಕರಲ್ಲೊಬ್ಬನಾದ ಕೊಲಂಬಿಯಾದ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ತನ್ನ ಗೆಳೆಯ, ಕ್ರಾಂತಿಕಾರಿ ನಾಯಕ ಫಿಡೆಲ್ ಕ್ಯಾಸ್ಟ್ರೊ ಬಗ್ಗೆ ಸದಾ ಹೃದಯ ತುಂಬಿ ಮಾತಾಡುತ್ತಿದ್ದ. ‘ಫಿಡೆಲ್ ಬಗ್ಗೆ ಮಾತಾಡುವಾಗ ನಾನು ತೀರ್ಮಾನ ಕೊಡುವ ಸ್ಥಾನದಲ್ಲಿ ನಿಂತು ಮಾತಾಡಲಾರೆ; ಭಾವನೆಗಳ ಲೋಕದಿಂದ ಮಾತ್ರ ಮಾತಾಡಬಲ್ಲೆ’ ಎಂದ ಮಾರ್ಕ್ವೆಜ್,  ‘ಈ ಜಗತ್ತಿನಲ್ಲಿ ನಾನು ಅತ್ಯಂತ ಪ್ರೀತಿಸುವ ವ್ಯಕ್ತಿ ಫಿಡೆಲ್’ ಎಂದಿದ್ದ. ಕ್ಯಾಸ್ಟ್ರೊಗಿಂತ ಎರಡು ವರ್ಷ ಮೊದಲೇ ತೀರಿಕೊಂಡ ಮಾರ್ಕ್ವೆಜ್ ನಿಲುವು ಕೊನೆಯವರೆಗೂ ಹಾಗೇ ಇದ್ದಂತಿತ್ತು.

ಒಮ್ಮೆ ಮಾರ್ಕ್ವೆಜ್ ಬರಹಗಾರರ ಕಮ್ಮಟದಲ್ಲಿ ಮಾತಾಡುತ್ತಿರುವಾಗ, ಲೇಖಕನೊಬ್ಬ ‘ಕ್ಯಾಸ್ಟ್ರೊ ಒಬ್ಬ ಸರ್ವಾಧಿಕಾರಿ’ ಎಂದಾಗ, ಮಾರ್ಕ್ವೆಜ್ ಹೇಳಿದ: ‘ಚುನಾವಣೆ ನಡೆಸುವುದೊಂದೇ ಪ್ರಜಾಪ್ರಭುತ್ವವಾದಿಯಾಗಿರುವ ಮಾರ್ಗವಲ್ಲ.’ ಆದರೆ ಗೆಳೆಯ ಮಾಡಿದ್ದನ್ನೆಲ್ಲ ಮಾರ್ಕ್ವೆಜ್ ಒಪ್ಪುತ್ತಿದ್ದನೆಂದಲ್ಲ. ಜೆಕೊಸ್ಲೊವಾಕಿಯದಲ್ಲಿ ಸೋವಿಯತ್ ಯೂನಿಯನ್ ಹಸ್ತಕ್ಷೇಪ ಮಾಡಿದ್ದನ್ನು ಕ್ಯಾಸ್ಟ್ರೊ ಬೆಂಬಲಿಸಿದರೆ, ಮಾರ್ಕ್ವೆಜ್ ಅದನ್ನು ಪ್ರತಿಭಟಿಸಿದ್ದ.

ಅಧಿಕಾರ ‘ಮಾನವನ ಅತ್ಯುನ್ನತ ಮಹತ್ವಾಕಾಂಕ್ಷೆ ಹಾಗೂ ಇಚ್ಛಾಶಕ್ತಿಯ ರೂಪ’ ಎಂದು ಅರಿತಿದ್ದ ಮಾರ್ಕ್ವೆಜ್, ಪ್ರಖ್ಯಾತ ಲೇಖಕನಾದ ಮೇಲೆ ಹಲವು ದೇಶಗಳ ರಾಜಕೀಯ ನಾಯಕರನ್ನು ಹತ್ತಿರದಿಂದ ಬಲ್ಲವನಾಗಿದ್ದ. ಆದರೆ ಫಿಡೆಲ್ ಜೊತೆಗಿನ ಅವನ ಸ್ನೇಹ ಬೆಳೆದದ್ದು ಸಾಹಿತ್ಯದ ಮೂಲಕ. ಒಂದು ರಾತ್ರಿ ಮಾರ್ಕ್ವೆಜ್ ಹಾಗೂ ಫಿಡೆಲ್ ಮಾತಾಡುತ್ತಾ ಕೂತಿದ್ದರು.

ಇನ್ನೇನು ಬೆಳಗಿನ ಜಾವ ಆಗುತ್ತಿರುವಂತೆ, ಫಿಡೆಲ್ ‘ಇವತ್ತು ಓದಬೇಕಾಗಿರುವ ಪುಸ್ತಕಗಳು ನನಗಾಗಿ ಕಾಯುತ್ತಿವೆ’ ಎನ್ನುತ್ತಾ ಮೇಲೆದ್ದು, ‘ಇವನ್ನೆಲ್ಲ ಓದಬೇಕಾದದ್ದು ಅನಿವಾರ್ಯ; ಆದರೆ ಬೋರಿಂಗ್ ಹಾಗೂ ಶ್ರಮದಾಯಕ ಕೂಡ’ ಎಂದ. ಅದಕ್ಕೆ ಮಾರ್ಕ್ವೆಜ್ ‘ನಡುನಡುವೆ ಒಳ್ಳೆಯ, ಆದರೆ ಕೊಂಚ ಲೈಟ್ ಆದ ಪುಸ್ತಕಗಳನ್ನು ಓದುವುದು ಆ ಭಾರವನ್ನು ಕಳೆಯುವ ಉಪಾಯ’ ಎಂದು ಪುಸ್ತಕಗಳ ಪಟ್ಟಿ ನೀಡಿದರೆ, ಫಿಡೆಲ್ ಅವನ್ನೆಲ್ಲ ಓದಿಬಿಟ್ಟಿದ್ದ; ಅಷ್ಟೇ ಅಲ್ಲ, ಅವುಗಳ ಬಗ್ಗೆ ತನ್ನ ಅಭಿಪ್ರಾಯಗಳನ್ನೂ ಹೇಳತೊಡಗಿದ!

‘ಫಿಡೆಲ್ ಎಂಥ ದೈತ್ಯ ಓದುಗನೆಂಬುದು ಅನೇಕರಿಗೆ ಗೊತ್ತಿರಲಿಕ್ಕಿಲ್ಲ’ ಎನ್ನುವ ಮಾರ್ಕ್ವೆಜ್, ಅವತ್ತು ಬೆಳಗಿನ ಜಾವ ಫಿಡೆಲ್‌ಗೆ ತನ್ನ ‘ದಿ ಟೇಲ್ ಆಫ್ ಎ ಶಿಪ್ ರೆಕ್ಡ್ ಸೈಲರ್’ ಪುಸ್ತಕ ಕೊಟ್ಟ. ಮಾರನೆಯ ದಿನ ಹನ್ನೆರಡು ಗಂಟೆಯ ಹೊತ್ತಿಗೆ ಸಿಕ್ಕ ಫಿಡೆಲ್, ಆ ಪುಸ್ತಕದಲ್ಲಿದ್ದ ತಪ್ಪುಗಳನ್ನು ತೋರಿಸಿಕೊಟ್ಟ! ಫಿಡೆಲ್‌ಗೆ ಸಾಹಿತ್ಯಲೋಕ ಪ್ರಿಯವಾಗಿದ್ದುದನ್ನು ಕಂಡ ಮಾರ್ಕ್ವೆಜ್ ಅವನನ್ನು ಭೇಟಿಯಾಗುವಾಗಲೆಲ್ಲ ಹಲಬಗೆಯ ಪುಸ್ತಕಗಳನ್ನು ಒಯ್ಯತೊಡಗಿದ.

ಫಿಡೆಲ್ ಬರೆಯುವುದರ ಖುಷಿ ಕಂಡುಕೊಂಡಿದ್ದುದನ್ನೂ ಮಾರ್ಕ್ವೆಜ್ ಅರಿತ. ಫಿಡೆಲ್ ಕಾರಿನಲ್ಲಿ ಹೋಗುವಾಗ ನೋಟ್ ಬುಕ್ಕಿನಲ್ಲಿ ಬರೆಯುತ್ತಿದ್ದ. ಒಳ್ಳೆಯ ಲೇಖಕನಂತೆ ತಕ್ಕ ನುಡಿಗಟ್ಟಿಗಾಗಿ ತಡಕಾಡುತ್ತಿದ್ದ. ಬರೆದದ್ದನ್ನು ಹೊಡೆದುಹಾಕಿ ಮಾರ್ಜಿನ್ನಿನಲ್ಲಿ ಇನ್ನೇನೋ ಸೇರಿಸುತ್ತಿದ್ದ.  ಸರಿಯಾದ ಪದ ಸಿಕ್ಕುವ ತನಕ ಹಲವು ದಿನ ನಿಘಂಟುಗಳನ್ನು ಹುಡುಕುತ್ತಿದ್ದ; ಅವರಿವರನ್ನು ಕೇಳುತ್ತಿದ್ದ.

ಕ್ರಾಂತಿಕಾರಿ ಹೋರಾಟದ ಮೂಲಕ ಬಟಿಸ್ಟಾ ಸರ್ಕಾರವನ್ನು ಕಿತ್ತೊಗೆದ ಮೇಲೆ ಹವಾನಾದಲ್ಲಿ ಫಿಡೆಲ್ ಮಾಡಿದ ಏಳು ಗಂಟೆಯ ಭಾಷಣ ವಿಶ್ವದಾಖಲೆಯಿರಬಹುದು ಎನ್ನುವ ಮಾರ್ಕ್ವೆಜ್‌ಗೆ ಅವತ್ತು ಎಲ್ಲಿ ಹೋದರೂ ಫಿಡೆಲ್ ಭಾಷಣ ಕೇಳುತ್ತಲೇ ಇತ್ತು. ಅವನ ಮಾತಿನ, ವಾದದ ಮಾಂತ್ರಿಕ ಶಕ್ತಿ ಮಾರ್ಕ್ವೆಜ್‌ಗೆ ಅರಿವಾಗುತ್ತಾ ಹೋಯಿತು. ಫಿಡೆಲ್ ಒರಟು ದನಿ ಕೇಳಿದ ಡಾಕ್ಟರು ಇನ್ನು ಐದು ವರ್ಷಗಳಲ್ಲಿ ಅವನು ಮಾತು ಕಳೆದುಕೊಳ್ಳಲಿದ್ದಾನೆಂದು ಹೇಳಿದರು. 1962ರಲ್ಲೊಂದು ದಿನ ಫಿಡೆಲ್ ಮಾತು ನಿಂತು ಹೋಯಿತು; ಆದರೆ ಮರಳಿ ಬಂತು!   
ಚಿಂತನೆ, ಕ್ರಿಯೆ ಹಾಗೂ ಜನರ ಜೊತೆಗಿನ ಮಾತುಕತೆಯ ಮೂಲಕ ವಿಕಾಸಗೊಳ್ಳುತ್ತಿದ್ದ ಫಿಡೆಲ್ ಮಾತಿನ ವೈಶಿಷ್ಟ್ಯವನ್ನು ಮಾರ್ಕ್ವೆಜ್ ಮಾತಿನಲ್ಲೇ ಕೇಳಿ: ‘ಸಣ್ಣಗಿನ ದನಿಯಲ್ಲಿ, ಮಾತಾಡಲೋ ಬೇಡವೋ ಎಂಬ ಅನುಮಾನದಲ್ಲೇ ಫಿಡೆಲ್ ಮಾತು ಶುರುವಾಗುತ್ತಿತ್ತು. ಖಚಿತವಿರದ ದಿಕ್ಕಿನಲ್ಲಿ, ಮಂಜಿನಲ್ಲಿ ತಡವರಿಸುತ್ತಾ ಅವನ ಮಾತು ಮುಂದಡಿಯಿಡುತ್ತಿತ್ತು. ಅವನು ಇಂಚಿಂಚೇ ಬೇರು ಬಿಡುತ್ತಾ, ಹಟಾತ್ತನೊಮ್ಮೆ ದೊಡ್ಡ ಪಂಜದ ಹೊಡೆತದ ಮೂಲಕ ಜನರನ್ನು ಹಿಡಿದಿಟ್ಟುಕೊಳ್ಳಲಾರಂಭಿಸುತ್ತಿದ್ದ.

ಆಮೇಲೆ ಜನರ ಜೊತೆಗಿನ ಮಾತುಕತೆಯ ಮೂಲಕ ಅವರಿಂದ ಪಡೆಯುವುದೂ ಕೊಡುವುದೂ ಶುರುವಾಗುವುದು. ಇಂಥ ಉದ್ವಿಗ್ನತೆಯಲ್ಲಿ ಅವನ ಉತ್ತುಂಗ ಸ್ಥಿತಿ ಸೃಷ್ಟಿಯಾಗುವುದು. ಇದು ಅವನ ಸ್ಫೂರ್ತಿಯ ನೆಲೆ. ಈ ರಮ್ಯಘನತೆಯ ಉಜ್ವಲತೆಯನ್ನು ನೋಡದವರು, ಅನುಭವಿಸದವರು ಮಾತ್ರ ಅದನ್ನು ಅಲ್ಲಗಳೆಯಬಲ್ಲರು.’
ಮಾರ್ಕ್ವೆಜ್ ಕಂಡಂತೆ ಫಿಡೆಲ್ ಕಮ್ಯುನಿಸಮ್ಮಿನ ಕ್ಲೀಷೆಗಳನ್ನು, ವಾಸ್ತವದ ನಂಟು ಕಳಚಿಕೊಂಡ ಭಾಷೆಯನ್ನು ಬಳಸುವವನಲ್ಲ. ತನ್ನ ಪ್ರೀತಿಯ ಲೇಖಕ ಜೋಸ್ ಮಾರ್ತಿಯ ಮಾತುಗಳನ್ನು ಬಿಟ್ಟರೆ ಬೇರೆ ಲೇಖಕರನ್ನು ಅವನು ಹೆಚ್ಚು ಉಲ್ಲೇಖಿಸುವುದಿಲ್ಲ. ಜೋಸ್ ಮಾರ್ತಿಯ ಇಪ್ಪತ್ತೆಂಟು ಸಂಪುಟಗಳನ್ನೂ ಓದಿದ್ದ ಫಿಡೆಲ್, ಮಾರ್ತಿಯ ಚಿಂತನೆಯನ್ನು ಮಾರ್ಕ್ಸ್‌ವಾದಿ ಕ್ರಾಂತಿಯ ರಕ್ತನಾಳಗಳ ಜೊತೆ ಬೆರೆಯುವಂತೆ ಮಾಡಿದ. ಪ್ರತಿಕೂಲ ಸ್ಥಿತಿ ಎದುರಾದಾಗಲೆಲ್ಲ ಫಿಡೆಲ್ ತೀವ್ರವಾಗುತ್ತಾ ಹೋಗುತ್ತಿದ್ದ.

ಗೆಳೆಯನೊಬ್ಬ ಒಮ್ಮೆ ಫಿಡೆಲ್‌ಗೆ ಹೇಳಿದನಂತೆ: ‘ಪರಿಸ್ಥಿತಿ ತೀರಾ ಬಿಗಡಾಯಿಸಿರಬೇಕು; ಅದಕ್ಕೇ ಇಷ್ಟೊಂದು ಉಜ್ವಲವಾಗಿ ಕಾಣುತ್ತಿದ್ದೀಯ.’ ಮಾತಾಡುತ್ತಲೇ ಚಿಂತಿಸುವ, ಚಿಂತಿಸುತ್ತಲೇ ಮಾತಾಡಿ ಸ್ಪಷ್ಟತೆ ಪಡೆಯುವ ಫಿಡೆಲ್ ನಡುರಾತ್ರಿಯಲ್ಲಿ ಗೆಳೆಯನೊಬ್ಬನ ಮನೆಗೆ ಹೋಗಿ ‘ಐದು ನಿಮಿಷ ಮಾತ್ರ’ ಎಂದು ನಿಂತೇ ಮಾತಾಡತೊಡಗುತ್ತಾನೆ.

ಮಾತುಕತೆ ಉಕ್ಕಿಸಿದ ಎನರ್ಜಿಯಿಂದಾಗಿ ಗಂಟೆಗಟ್ಟಲೆ ಮಾತಾಡುತ್ತಾನೆ; ಕೊನೆಗೆ ಆರಾಮಕುರ್ಚಿಯಲ್ಲಿ ಕೂತು ‘ನಾನೀಗ ಹೊಸ ಮನುಷ್ಯನಾದೆ ಎನ್ನಿಸುತ್ತಿದೆ’ ಎನ್ನುತ್ತಾನೆ.
Image result for fidel castroಮಾರ್ಕ್ವೆಜ್ ಬರೆಯುತ್ತಾನೆ: ‘ಮಾತಾಡಿ ದಣಿದ ಫಿಡೆಲ್, ಮಾತಿನಲ್ಲೇ ದಣಿವಾರಿಸಿಕೊಳ್ಳುವುದು ಹೀಗೆ.’ ಮಾರ್ಕ್ವೆಜ್ ಪ್ರಕಾರ, ರಾಜಕಾರಣಿಯಾಗಿ ಫಿಡೆಲ್‌ನ ಅದ್ಭುತ ಶಕ್ತಿಯೆಂದರೆ ಒಂದು ಸಮಸ್ಯೆ ಎಲ್ಲಿ ಹುಟ್ಟಿ, ಹೇಗೆ ಬೆಳೆಯುತ್ತಿದೆ ಎಂಬುದನ್ನು ಆಳವಾಗಿ ಗ್ರಹಿಸುವುದು. ಅದು ಕೂಡ ಹಲಬಗೆಯ ಮಾತುಕತೆಗಳ ಮೂಲಕವೇ ಬೆಳೆಯುತ್ತಾ ಹೋಗುವುದು.

ಒಮ್ಮೆ ಹಲವು ತಿಂಗಳುಗಳ ಚಿಂತನೆ, ಮಾತುಕತೆಯ ಮೂಲಕ ಫಿಡೆಲ್, ಲ್ಯಾಟಿನ್ ಅಮೆರಿಕದ ದೇಶಗಳು ತೀರಿಸಬೇಕಾದ ಸಾಲ ಕುರಿತು ತರ್ಕಬದ್ಧವಾಗಿ ವಿವೇಚಿಸಿ, ‘ಆ ಸಾಲವನ್ನು ಲ್ಯಾಟಿನ್ ಅಮೆರಿಕನ್ ದೇಶಗಳು ತೀರಿಸಬೇಕಾಗಿಲ್ಲ’ ಎಂಬುದನ್ನು ತೋರಿಸಿದ.  ಇಂಥ ವಿವೇಚನೆಯ ಜೊತೆಗೆ ಫಿಡೆಲ್‌ಗಿದ್ದ ಅದ್ಭುತ ಶಕ್ತಿಯೆಂದರೆ ನೆನಪು.

ಬೆಳಗಾಗೆದ್ದು ಸುಮಾರು ಇನ್ನೂರು ಪುಟಗಳಷ್ಟು ಸುದ್ದಿಯೊಂದಿಗೆ ಫಿಡೆಲ್‌ನ ಬೆಳಗಿನ ಉಪಾಹಾರ; ಪ್ರತಿದಿನ ಓದಲೇಬೇಕಾದ ಕೊನೇಪಕ್ಷ ಐವತ್ತು ದಾಖಲೆಗಳು; ಜೊತೆಗೆ ಪುಸ್ತಕಗಳು. ಅವನ್ನು ಹೇಗೆ ನೆನಪಿಟ್ಟುಕೊಳ್ಳುತ್ತಾನೆ, ಓದಲು ಅವನಿಗೆ ಎಲ್ಲಿಂದ ಟೈಮ್ ಸಿಗುತ್ತದೆ, ಅವನ ಓದಿನ ಸ್ಪೀಡ್ ಹೇಗಿರಬಹುದು... ಊಹಿಸುವುದು ಕಷ್ಟ. ಅವನ ಕಾರಿನಲ್ಲಿ ಯಾವಾಗಲೂ ಓದಲು ಒಂದು ಲೈಟ್ ಇರುತ್ತಿತ್ತು.

ಎಷ್ಟೋ ಸಲ ಫಿಡೆಲ್ ಬೆಳಗಿನ ಜಾವ ಓದಲು ಒಯ್ದ ಪುಸ್ತಕದ ಬಗ್ಗೆ ಬೆಳಗ್ಗೆಗಾಗಲೇ ಮಾತಾಡಿದ್ದಿದೆ.  ಆರ್ಥಿಕತೆಯ, ಚರಿತ್ರೆಯ ಪುಸ್ತಕಗಳೆಂದರೆ ಅವನಿಗೆ ಇಷ್ಟ. ಹಾಗೆಯೇ ತೀವ್ರ ಮಾತುಕತೆಗಳು. ಈ ಎಲ್ಲದರ ಮೂಲಕ ಫಿಡೆಲ್ ಹಲವು ದೇಶಗಳನ್ನು ಬಲ್ಲವನಾಗಿದ್ದ. ಅದರಲ್ಲೂ ಅಮೆರಿಕದ ಜನ, ಅಲ್ಲಿನ ಅಧಿಕಾರ ರಚನೆಗಳು, ಅಮೆರಿಕನ್ ಸರ್ಕಾರಗಳು ಕ್ಯೂಬಾಕ್ಕೆ ಒಡ್ಡುವ ಅಡೆತಡೆಗಳು, ಅವನ್ನು ಎದುರಿಸುವ ಮಾರ್ಗಗಳು ಎಲ್ಲವನ್ನೂ ಗ್ರಹಿಸುತ್ತಿದ್ದ. ತನ್ನ ಅಧಿಕಾರಿಗಳು ಸತ್ಯ ಬಚ್ಚಿಟ್ಟರೂ ಅದು ಫಿಡೆಲ್‌ಗೆ ತಿಳಿಯುತ್ತಿತ್ತು...

ಜಗತ್ತಿನ ಬಹುದೊಡ್ಡ ಲೇಖಕರಲ್ಲೊಬ್ಬನಾದ ಮಾರ್ಕ್ವೆಜ್ ಕೊಟ್ಟಿರುವ ಈ ಆತ್ಮೀಯ, ಅಥೆಂಟಿಕ್ ಫಿಡೆಲ್ ಚಿತ್ರಗಳನ್ನು ನೋಡುತ್ತಿದ್ದರೆ ಫಿಡೆಲ್ ಥರದ ನಾಯಕರೊಳಗಿನ ಚಾಲಕಶಕ್ತಿ ಹಾಗೂ ಇಂದಿನ ಬಂಡವಾಳಶಾಹಿಯ ಕ್ರೌರ್ಯವನ್ನು ಎದುರಿಸಲು ಚಿಂತಕ-ನಾಯಕರು ಹುಡುಕಿಕೊಡುವ ಹಾದಿಗಳು ಸ್ಪಷ್ಟವಾಗಿ ಕಾಣತೊಡಗುತ್ತವೆ.
ಕೊನೆ ಟಿಪ್ಪಣಿ: ‘ಮಧ್ಯಮಜೀವಿ’ಗಳಿಗೆ ಫಿಡೆಲ್ ಪಾಠಗಳು

ಇವತ್ತಿನ ಅಂಕಣದಲ್ಲಿ ಕ್ಯಾಸ್ಟ್ರೊನ ಬೌದ್ಧಿಕ ಮುಖಗಳನ್ನು ಹೆಚ್ಚು ಬಿಂಬಿಸಲು ಕಾರಣವಿದೆ. ಇವತ್ತು ಎಡವೂ ಅಲ್ಲದ, ಬಲವೂ ಅಲ್ಲದ ಮಾರ್ಗವೊಂದಿದೆ ಎಂದು ಮುಗ್ಧವಾಗಿ ನಂಬುವವರಿರಬಹುದು. ಆದರೆ ಎಡಪಂಥೀಯ ಚಿಂತನೆಯಿಲ್ಲದಿದ್ದರೆ ಕಳೆದ ನೂರು ವರ್ಷಗಳಲ್ಲಿ ಅನೇಕ ದೇಶಗಳ ಜನಜೀವನವೇ ಬದಲಾಗುತ್ತಿರಲಿಲ್ಲ. ಇದು ಫಿಡೆಲ್ ಮಾತು- ಕ್ರಿಯೆಗಳನ್ನು ಕಂಡಾಗಲೂ ಹೊಳೆಯುತ್ತದೆ.

ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಕ್ಯಾಪಿಟಲಿಸಮ್ಮಿನಿಂದಾಗಿ ಹೆಚ್ಚಿರುವ ಸಂಪತ್ತಿನ ಭಯಾನಕ ಕೇಂದ್ರೀಕರಣ, ಅದು ಸೃಷ್ಟಿಸುತ್ತಿರುವ ಕಂದರ ಕುರಿತು ಜವಾಬ್ದಾರಿಯುತ ಎಡಪಂಥೀಯ ಚಿಂತಕರು ಬರೆಯದಿದ್ದರೆ ಯಾರಿಗೂ ಈ ಭೀಕರ ಮುಖಗಳ ಬಗ್ಗೆ ಸ್ಪಷ್ಟತೆ ಇರುತ್ತಿರಲಿಲ್ಲ.

1999ರಲ್ಲಿ ವೆನಿಜುವೆಲಾ ವಿಶ್ವವಿದ್ಯಾಲಯದಲ್ಲಿ ಫಿಡೆಲ್ ಮಾಡಿದ ‘ಬ್ಯಾಟಲ್ ಆಫ್ ಐಡಿಯಾಸ್’ ಭಾಷಣ ಒಂದನ್ನಷ್ಟೇ ಮಧ್ಯಮವರ್ಗದ ‘ಮಧ್ಯಮಮಾರ್ಗ’ಗಳ ಸೋಮಾರಿವಲಯ ಓದಿದರೂ ಸಾಕು: ಇವತ್ತಿನ ನಿಜವಾದ ಸವಾಲುಗಳೆದುರು ತಮ್ಮ ಜಾಣನುಡಿಗಟ್ಟುಗಳು ಎಷ್ಟು ಬೋಗಸ್ ಎಂಬುದು ಹೊಳೆಯುತ್ತದೆ.

ಮಾರ್ಕ್ಸ್ ಚಿಂತನೆಗಳಿಲ್ಲದಿದ್ದರೆ  ಇಲ್ಲಿ ಸ್ತ್ರೀವಾದವಾಗಲೀ, ಇನ್ನಿತರ ಬಗೆಯ ಸಮಾಜವಾದಗಳಾಗಲೀ ಹುಟ್ಟುವುದು ಕಷ್ಟವಿತ್ತು. ಅಂಬೇಡ್ಕರ್ ಮಾರ್ಕ್‌್ಸವಾದವನ್ನು ಒಪ್ಪದವರಂತೆ ಕಂಡರೂ, ಅವರ ಲೇಬರ್ ಪಾರ್ಟಿ, ‘ಪ್ರಭುತ್ವ ಸಮಾಜವಾದ’ದ ಕಲ್ಪನೆ, ಭೂ ರಾಷ್ಟ್ರೀಕರಣ, ಬುದ್ಧ-ಮಾರ್ಕ್‌್ಸರನ್ನು ಹೋಲಿಸಿದ ರೀತಿಗಳಲ್ಲಿ ಮಾರ್ಕ್‌್ಸವಾದದ ಪ್ರೇರಣೆಯಿತ್ತು. ದಲಿತ ಚಳವಳಿ ತನ್ನ ಉಜ್ವಲ ಘಟ್ಟದಲ್ಲಿ ಮಾರ್ಕ್‌್ಸವಾದದಿಂದ ತಾತ್ವಿಕ, ಸಂಘಟನಾತ್ಮಕ ಪ್ರೇರಣೆಗಳನ್ನು ಪಡೆದಿದ್ದನ್ನು ಮರೆಯಬಾರದು.

ಎಲ್ಲ ಬಗೆಯ ಚಿಂತನೆಗಳಿಗೂ ಸ್ಥಗಿತತೆ ಬರಬಹುದು. ಆದರೆ ಕ್ಯಾಸ್ಟ್ರೊ  ರೀತಿ ತಂತಮ್ಮ ನಾಡುಗಳ ವಾಸ್ತವಗಳಿಗೆ ತಕ್ಕಂತೆ ಚಿಂತನೆಗಳನ್ನು ಮರುರೂಪಿಸಿಕೊಳ್ಳುವ ಬೌದ್ಧಿಕತೆ; ಚಿಂತನೆಗಳನ್ನು ಜಾರಿಗೆ ತರಬಲ್ಲ ಪ್ರಾಕ್ಟಿಕಲ್ ಮಾರ್ಗಗಳಿಂದ ಮಾರ್ಕ್‌್ಸವಾದಕ್ಕೆ ಸಮಕಾಲೀನತೆ ಬರುತ್ತದೆಯೇ ಹೊರತು, ಅದರ ಗಿಳಿಪಾಠದಿಂದಾಗಲೀ, ಅದನ್ನು ಗ್ರಹಿಸಲಾಗದ ಸಲೀಸು ಮಧ್ಯಮಮಾರ್ಗದಿಂದಾಗಲೀ ಅಲ್ಲ.

ಈ ಕಾಲದ ಶ್ರೇಷ್ಠ ವಿಮರ್ಶಕರಲ್ಲೊಬ್ಬನಾದ ಟೆರಿ ಈಗಲ್ಟನ್ ಇಪ್ಪತ್ತೊಂದನೆಯ ಶತಮಾನದ ವಾಸ್ತವದಲ್ಲಿ ಕಾಲೂರಿ ನಿಂತು ಬರೆದಿರುವ ‘ವೈ ಮಾರ್ಕ್ಸ್ ವಾಸ್ ರೈಟ್’ ಪುಸ್ತಕವನ್ನು ಮುಕ್ತವಾಗಿ ಓದಿದರೆ ನಮ್ಮ ಅನೇಕ ಬೌದ್ಧಿಕ ಗೊಂದಲಗಳು ಕಡಿಮೆಯಾಗಬಲ್ಲವು. ಈ ಪುಸ್ತಕವನ್ನು ‘ಕಾರ್ಪೊರೇಟ್ ಕಾಲದಲ್ಲೂ ಮಾರ್ಕ್‌್ಸವಾದ ಪ್ರಸ್ತುತ’ (ಚಿಂತನ ಪುಸ್ತಕ) ಎಂದು ಆರ್.ಕೆ.ಹುಡಗಿ ಅನುವಾದಿಸಿದ್ದಾರೆ.

ಸಾಹಿತ್ಯ ವಿಮರ್ಶೆಯಲ್ಲಿ ಸರಳ ಕಮ್ಯುನಿಸಮ್ಮಿನ ನಿರ್ದೇಶನಗಳಿಂದ ಹುಟ್ಟುವ ಸಮಸ್ಯೆಗಳ ಜೊತೆಗೆ ಇಡೀ ಮಾರ್ಕ್‌್ಸವಾದವನ್ನೇ ಸಮೀಕರಿಸಿ ಗೊಂದಲಗೊಂಡು, ಗೊಂದಲ ಹಂಚುವವರು ಈ ಯುಗದ ಮಹತ್ವದ ಪಠ್ಯಗಳಲ್ಲೊಂದಾದ ‘ಕಮ್ಯುನಿಸ್ಟ್ ಮ್ಯಾನಿಫೆಸ್ಟೊ’ ಹಾಗೂ ಇನ್ನಿತರ ಮಾರ್ಕ್‌್ಸವಾದಿ ಪಠ್ಯಗಳನ್ನು ಇವತ್ತಿನ ಕ್ಯಾಪಿಟಲಿಸಮ್ಮಿನ ಭೀಕರ ಕುಣಿತದ ಕಾಲದಲ್ಲಿ ಓದಿ ಸ್ಪಷ್ಟತೆ ಪಡೆಯುವುದು ಒಳ್ಳೆಯದು. ಹಾಗೆಯೇ, ಸಾಹಿತ್ಯ ಸೃಷ್ಟಿಯ ಸ್ವಾಯತ್ತತೆಯಲ್ಲಿ ಖಚಿತ ನಂಬಿಕೆಯಿಟ್ಟಿದ್ದ ಮಾರ್ಕ್ವೆಜ್, ಕಮ್ಯುನಿಸ್ಟನಾದ ಫಿಡೆಲ್‌ನನ್ನು ಯಾಕೆ ದೊಡ್ಡ ನಾಯಕನೆಂದು ಒಪ್ಪಿಕೊಂಡಿದ್ದ ಎಂಬುದರ ಬಗೆಗೂ ಮುಕ್ತವಾಗಿ ಯೋಚಿಸಬೇಕು.
Dr. Nataraj Huliyar